July 16, 2026

ಗಂಗಾದೇವಿ ದೇವಸ್ಥಾನದಲ್ಲಿ ಪಾದಗಟ್ಟೆ ಪ್ರತಿಷ್ಠಾಪನೆ: ಗಂಗಾಮತ ಸಮಾಜದ ಸೇವಾ ಕಾರ್ಯಗಳಿಗೆ ಪರಣ್ಣ ಮುನವಳ್ಳಿ ಮೆಚ್ಚುಗೆ

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 23/06/2026

ಗಂಗಾವತಿ:ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಗಂಗಾಮತ ಸಮಾಜದ ವತಿಯಿಂದ ಗಂಗಾದೇವಿ ದೇವಸ್ಥಾನದಲ್ಲಿ ಗಂಗಾದೇವಿ ಪಾದಗಟ್ಟೆ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಮಂಗಳವಾರ ಭಕ್ತಿಭಾವದಿಂದ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಕಲ್ಮಠದ ಕೊಟ್ಟೂರೇಶ್ವರ ಸ್ವಾಮೀಜಿಗಳು ಹಾಗೂ ಹೆಬ್ಬಾಳ ಮಠದ ನಾಗಭೂಷಣ ಶ್ರೀಗಳು ಧಾರ್ಮಿಕ ಪೂಜಾ ವಿಧಿವಿಧಾನಗಳ ಮೂಲಕ ಗಂಗಾದೇವಿ ಪಾದಗಟ್ಟೆಯನ್ನು ಪ್ರತಿಷ್ಠಾಪಿಸಿದರು. ಬಳಿಕ ಗಂಗಾದೇವಿ ಜಯಂತಿ ಅಂಗವಾಗಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪರಣ್ಣ ಮುನವಳ್ಳಿ, ಗಂಗಾಮತ ಸಮಾಜವು ಆರ್ಥಿಕ, ಧಾರ್ಮಿಕ ಹಾಗೂ ರಾಜಕೀಯವಾಗಿ ಸಾಕಷ್ಟು ಹಿಂದುಳಿದಿದ್ದರೂ ಸಮಾಜ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿದೆ ಎಂದು ಹೇಳಿದರು. ಸಮಾಜದ ಕುಲದೇವತೆಯಾಗಿರುವ ಗಂಗಾದೇವಿಯ ಆರಾಧನೆಯೊಂದಿಗೆ ಪ್ರತಿವರ್ಷ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸುವುದರ ಜೊತೆಗೆ ಬಡವರ ಅನುಕೂಲಕ್ಕಾಗಿ ಸಾಮೂಹಿಕ ವಿವಾಹಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಗಂಗಾಮತ ಸಮಾಜ ಬಡ ಸಮಾಜವಾಗಿದ್ದರೂ ಇತರ ಬಡವರಿಗೆ ಸಹಾಯ ಮಾಡುವ ಗುಣವನ್ನು ಹೊಂದಿರುವುದು ಹೆಮ್ಮೆಯ ಸಂಗತಿ. ಪ್ರತಿಯೊಬ್ಬರೂ ಇಂತಹ ಸಾಮಾಜಿಕ ಕಳಕಳಿಯ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯ. ಗಂಗಾದೇವಿಯ ರಥೋತ್ಸವದಂತಹ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗಂಗಾಮತ ಸಮಾಜದ ಮುಖಂಡರು, ಭಕ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News

About The Author

error: Content is protected !!