August 21, 2026

ಭೂಮಾನಂದ ಕೊಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನಕ್ಕೆ ಆಗ್ರಹ

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 12/08/2026

ದಲಿತ ಸಂಘರ್ಷ ಸಮಿತಿ ಒತ್ತಾಯ | ಕುಟುಂಬಕ್ಕೆ ರಕ್ಷಣೆ, ಪರಿಹಾರ ನೀಡುವಂತೆ ಮನವಿ

ಗಂಗಾವತಿ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ದಲಿತ ಯುವ ಮುಖಂಡ ಭೂಮಾನಂದ ಅವರ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಾನೂನುಬದ್ಧವಾಗಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಸಂಬಂಧ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷ ಸಿ.ಕೆ. ಮರಿಸ್ವಾಮಿ ಬರಗೂರು ಅವರ ನೇತೃತ್ವದಲ್ಲಿ ಗಂಗಾವತಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಭೂಮಾನಂದ ಅವರು ಸಮಾಜದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಸಾಮಾಜಿಕ ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದ ಯುವ ಮುಖಂಡರಾಗಿದ್ದರು. ಅವರ ಹತ್ಯೆ ಖಂಡನೀಯವಾಗಿದ್ದು, ಘಟನೆಯಿಂದ ಮೃತರ ಕುಟುಂಬ ಹಾಗೂ ದಲಿತ ಸಮುದಾಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಸಂಘಟನೆ ತಿಳಿಸಿದೆ.

ಕೊಲೆ ಪ್ರಕರಣದ ತನಿಖೆಯನ್ನು ಯಾವುದೇ ರಾಜಕೀಯ ಅಥವಾ ಸಾಮಾಜಿಕ ಒತ್ತಡಕ್ಕೆ ಒಳಗಾಗದೆ ನಿಷ್ಪಕ್ಷಪಾತವಾಗಿ ನಡೆಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ಸೂಕ್ತ ಪೊಲೀಸ್ ರಕ್ಷಣೆ ಹಾಗೂ ಸರ್ಕಾರದಿಂದ ಸಮರ್ಪಕ ಪರಿಹಾರ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಂಘಟನೆ ಸಂಚಾಲಕ ಬಸವರಾಜ ಮಲ್ಲಾಪೂರು, ಕೊಪ್ಪಳ ತಾಲೂಕು ಅಧ್ಯಕ್ಷ ರವಿ ಗುಡ್ಲಾನೂರು, ತಾಲೂಕು ಸಂಘಟನೆ ಸಂಚಾಲಕ ಭುವನೇಶ ಗಾಂಧಿನಗರ, ನಗರ ಘಟಕ ಸದಸ್ಯ ನಾಗರಾಜ ಜೈ ಭೀಮನಗರ, ತಾಲೂಕು ಸಂಘಟನೆ ಸಂಚಾಲಕ ನವೀನ ಜೈ ಭೀಮನಗರ, ಸಂಘಟನೆ ಮುಖಂಡರಾದ ಸುರೇಶ್ ಮಾಳೇಮನಿ, ಕನಕಗಿರಿ ತಾಲೂಕು ಅಧ್ಯಕ್ಷ ಪಂಪಾಪತಿ, ಗಂಗಾವತಿ ತಾಲೂಕು ಅಧ್ಯಕ್ಷ ಯಲ್ಲಪ್ಪ ಎಂ. ದುರಗೇಶ ಜಮಾಪೂರು, ಕಾನೂನು ಸಲಹೆಗಾರರಾದ ಚನ್ನಮ್ಮ ಚಳ್ಳೂರು, ನರೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News